ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಮೂಡ್ಲಕಟ್ಟೆ ಐಎಂಜೆ ಸಂಸ್ಥೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದ ಭಾರತೀಯ ಸೇನೆಯ ಮಾಜಿ ಸೈನಿಕರಾದ ಸಂತೋಷ್ ಕುಮಾರ್ ಶೆಟ್ಟಿ ಬಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ ದೇಶ ಸೇವೆ ಮಾಡಲು ಸೈನಿಕರಾಗಿ ಗಡಿ ರಕ್ಷಣೆ ಮಾಡುವುದೊಂದೇ ಮಾರ್ಗವಲ್ಲ, ಪ್ರತಿಯೊಬ್ಬರೂ ಸಂಸ್ಕಾರಯುತರಾಗಿ ಉತ್ತಮ ವ್ಯಕ್ತಿತ್ವವನ್ನು ರೂಢಿಸಿಕೊಂಡು ಗುರು ಹಿರಿಯರಿಗೆ ಗೌರವ ನೀಡಿದರೆ ಸಾಕು, ಅಲ್ಲದೆ ನೀವು ಸೈನಿಕರಾಗಿ ಸೇವೆ ಸಲ್ಲಿಸಲು ಈಗ ಅಗ್ನಿವೀರ್ ಉತ್ತಮ ಅವಕಾಶಗಳನ್ನು ಸೃಷ್ಟಿಸಿದೆ.ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ರವರು, ತಮ್ಮ ಅಧ್ಯಕ್ಷಿಯ ಭಾಷಣದಲ್ಲಿ ಸ್ವರ್ಣ ಭಾರತ ಸ್ವರ್ಣ ಭವಿಷ್ಯದ ಬಗ್ಗೆ ತಿಳಿಸುತ್ತಾ, ಸದೃಢ ಭಾರತೀಯರಿಂದ ಸದೃಢ ಭಾರತ ನಿರ್ಮಾಣ ಸಾಧ್ಯವೆಂದರು.
ಮೂಡ್ಲಕಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಮ್ , ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನಜೆ಼ಸ್, ಐ ಎಂ ಜೆ ಪದವಿ ಕಾಲೇಜಿನ ಉಪ ಪ್ರಾಂಶುಪಾಲರಾದ ಜಯಶೀಲ್ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರವೀಣ್ ಖಾರ್ವಿ ಉಪಸ್ಥಿತರಿದ್ದರು.
ಧ್ವಜಾರೋಹಣದ ಬಳಿಕ, ಧ್ವಜ ಗೀತೆ, ವಂದೇ ಮಾತರಂ ಮತ್ತು ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರಗೀತೆ ಹಾಡಲಾಯಿತು. ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯು ಆನ್-ಲೈನ್ ನಲ್ಲಿ ಏರ್ಪಡಿಸಿದ ಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು ಹಾಗೂ ಮುಖ್ಯ ಅತಿಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಐ.ಎಂ. ಜೆ ಸಂಸ್ಥೆಯ ಉಪನ್ಯಾಸಕ ವೃಂದದವರು, ಕಚೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು. ಕಾರ್ಯಕ್ರಮವನ್ನು ಗಣಿತ ಉಪನ್ಯಾಸಕರಾದ ಕು. ರಕ್ಷಿತಾ ಆರ್ ಅಡಿಗ ನಿರೂಪಿಸಿದರು.