ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಪುರಾಣ ಹಾಗೂ ಇತಿಹಾಸ ಪ್ರಸಿದ್ದವಾದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವೈಭವದ ಶ್ರೀ ಮನ್ಮಹಾರಥೋತ್ಸವ ಶನಿವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀ ದೇವಿಯ ವಿಜ್ರಂಭಣೆಯ ಉತ್ಸವಕ್ಕೆ ಆಸು ಪಾಸಿನ ಗ್ರಾಮಗಳಿಂದ, ರಾಜ್ಯದ ವಿವಿಧ ಭಾಗಗಳಿಂದ ಹೊರರಾಜ್ಯದಿಂದ ಹಾಗೂ ವಿದೇಶದಿಂದ ಬಂದಿದ್ದ ದೊಡ್ಡ ಸಂಖ್ಯೆಯ ಭಕ್ತರು ಸಾಕ್ಷಿಗಳಾದರು.
ದೇವಳದ ತಂತ್ರಿ, ಪ್ರಧಾನ ಅರ್ಚಕ ಕೆ. ನಿತ್ಯಾನಂದ ಅಡಿಗ ನೇತೃತ್ವದಲ್ಲಿ ಬೆಳಗ್ಗಿನಿಂದಲೇ ಮುಹೂರ್ತ ಮಂಗಳಾರತಿ, ಪಂಚಾಮೃತ ಅಭಿಷೇಕ, ಕ್ಷಿಪ್ರಬಲಿ, ವಿಶೇಷ ಭೂತ ಬಲಿ, ರಥಾರೋಹಣ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಸಹಸ್ರಾರು ಭಕ್ತರು ಮಧ್ಯಾಹ್ನ ದೇವಳದ ಭೋಜನಶಾಲೆಯಲ್ಲಿ ಅನ್ನಪ್ರಸಾದ ಸ್ವೀಕರಿಸಿದರು. ಸಂಜೆ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತರು ರಥ ಎಳೆದು ಸಂಭ್ರಮಿಸಿದರು.
ಶಾಸಕ ಗುರುರಾಜ ಗಂಟಿಹೊಳೆ ಪತ್ನಿಯೊಂದಿಗೆ ದೇವಳಕ್ಕೆ ಭೇಟಿ ನೀಡಿ ರಥೋತ್ಸವದಲ್ಲಿ ಪಾಲ್ಗೊಂಡರು. ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾರ್ಗದರ್ಶನದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ, ಸದಸ್ಯರಾದ ಯು. ರಾಜೇಶ ಕಾರಂತ್, ಸುರೇಂದ್ರ ಶೆಟ್ಟಿ, ಧನಾಕ್ಷಿ ವಿಶ್ವನಾಥ, ಸುಧಾ ಕೆ. ಕಾರ್ಯನಿರ್ವಹಣಾಧಿ ಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಉಸ್ತುವಾರಿ ವಹಿಸಿದ್ದು, ಅರ್ಚಕ ವೃಂದ, ದೇವಳದ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯಾಡಳಿತ ಜಾತ್ರೆಯ ಯಶಸ್ಸಿಗೆ ಸಹಕರಿಸಿದ್ದರು. ಜಾತ್ರಾ ಮಹೋತ್ಸವದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಕುಂದಾಪುರ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಸವಿತ್ರತೇಜ್ ಮತ್ತು ಕೊಲ್ಲೂರು ಠಾಣಾಧಿಕಾರಿ ವಿನಯ್ ಎಂ. ಕೊರ್ಲಹಳ್ಳಿ, ಸುಧಾರಾಣಿ ಟಿ ನೇತೃತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.