ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ ಕಾಂಗ್ರೆಸ್ ಸರಕಾರ, ಮುಸಲ್ಮಾನರಿಗೆ ಗುತ್ತಿಗೆಯಲ್ಲೂ ಶೇ.4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ ಬಿರುಕು ಮೂಡಿಸುತ್ತಿರುವುದಲ್ಲದೆ ಮುಸ್ಲಿಮರಿಗಾಗಿ ಸಂವಿಧಾನವನ್ನೇ ಬದಲಾಯಿಸಲು ಹೊರಟಿದ್ದಾರೆ. ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಸರಕಾರದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ ಖಂಡನೀಯ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಇವರ ನೇತೃತ್ವದಲ್ಲಿ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಯ ವಿರುದ್ಧ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿಯವರು ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿಕೆ ನೀಡಿರುವ ಸಂವಿಧಾನ ವಿರೋಧಿ ಡಿ.ಕೆ. ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಖಂಡಿಸಿದರು.
ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ. ಎಸ್. ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನದಾಸ ಶೆಣೈ, ಉಪಾದ್ಯಕ್ಷೆ ವನಿತಾ ಬಿಲ್ಲವ, ಕುಂದಾಪುರ ಮಂಡಲ ಉಪಾಧ್ಯಕ್ಷರುಗಳು, ಮಂಡಲದ ಪದಾಧಿಕಾರಿಗಳು ವಿವಿಧ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಮತ್ತು ಸದಸ್ಯರು, ಮತ್ತು ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಂವಿಧಾನ ವಿರೋಧಿ ಡಿ.ಕೆ. ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆಗಳನ್ನು ಕೂಗಿ ಡಿ.ಕೆ. ಶಿವಕುಮಾರ್ ಪ್ರತಿಕೃತಿ ದಹಿಸಿಲಾಯಿತು.