ಕುಂದಾಪುರ ಮಿರರ್ ಸುದ್ದಿ…
ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು, ಪಡುಕೆರೆಯಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ಓದುಗರ ವೇದಿಕೆಯನ್ನು ಉದ್ಘಾಟಿಸಲಾಯಿತು.
ಕನ್ನಡದ ಮೊದಲ ರಾಷ್ಟ್ರಕವಿ ಪಂಜೆ ಮಂಗೇಶರಾಯರ ಕವನವನ್ನು ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಶ್ರೀ ರಕ್ಷಾ ವಾಚಿಸುವ ಮೂಲಕ ಉದ್ಘಾಟನೆಗೊಂಡಿತು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕರಾದ ವೆಂಕಟೇಶ್, ಡಿಜಿಟಲ್ ಸಾಕ್ಷರತೆ ಮತ್ತು ಗ್ರಂಥಾಲಯದ ಬಳಕೆ ಕುರಿತಾಗಿ ವಿಶೇಷ ಉಪನ್ಯಾಸ ನೀಡಿ ವಿದ್ಯಾರ್ಥಿಗಳನ್ನು ಒಳಗೊಂಡು ಸಮಾಜದ ಎಲ್ಲಾ ವರ್ಗಗಳ ಜನರಿಗೆ ಇ-ಕಲಿಕೆ ಅನಿವಾರ್ಯವಾಗಿದ್ದು, ಇದರ ಸತ್ಯಾಸತ್ಯತೆಯನ್ನು ಮತ್ತು ಒಪ್ಪಿಕೊಳ್ಳಬಹುದಾದ ಮಾಹಿತಿಯನ್ನು ಸಂಗ್ರಹಿಸುವುದು ಅವಶ್ಯಕ. ಯಾವ ಮಾಹಿತಿಯನ್ನು ತ್ವರಿತವಾಗಿ ಹೇಗೆ ಸಂಗ್ರಹಿಸಬಹುದೆಂಬುದರ ಕುರಿತಾಗಿ ವಿದ್ಯಾರ್ಥಿಗಳಿಗೆ ಅಗತ್ಯ ಮತ್ತು ಸರಳ ವಿಧಾನಗಳನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೋ. ನಿತ್ಯಾನಂದ ವಿ ಗಾಂವಕರ ಯುವಜನತೆಯಲ್ಲಿ ಓದುವ ಹವ್ಯಾಸ ಕ್ಷೀಣಿಸುತ್ತಿರುವ ಇಂದಿನ ದಿನಗಳಲ್ಲಿ ಡಿಜಿಟಲ್ ಗ್ರಂಥಾಲಯದ ಮಹತ್ವ ಹಾಗೂ ಓದುಗರ ವೇದಿಕೆಯು ವಿದ್ಯಾರ್ಥಿಗಳನ್ನು ಗ್ರಂಥಾಲಯದತ್ತ ಮುಖ ಮಾಡಲು ಪ್ರೇರೇಪಿಸುತ್ತದೆ. ಇದರ ಉಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆಯಿತ್ತರು.
ಕಾರ್ಯಕ್ರಮ ಆಯೋಜಿಸಿದ ಗ್ರಂಥಪಾಲಕ ಕೃಷ್ಣ ಸಾಸ್ತಾನ ಓದುಗರ ವೇದಿಕೆಯ ರಚನೆ ಮತ್ತು ಅತ್ಯುತ್ತಮ ಓದುಗರಿಗಾಗಿ ನೀಡುವ ಪುರಸ್ಕಾರಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಪಂಜೆ ಮಂಗೇಶರಾಯರ ಜೀವನ-ಸಾಧನೆಯನ್ನು ಪರಿಚಯಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಕಳ ಮಂಜುನಾಥ ಪೈ, ರಾಜ್ಯಶಾಸ್ತ್ರ ಮುಖ್ಯಸ್ಥ ಪ್ರಶಾಂತ್ ನೀಲಾವರ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರೆ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಮಂಜುನಾಥ ಆಚಾರಿ ಕಾರ್ಯಕ್ರಮ ನಿರೂಪಿಸಿದರು. ಬೋಧಕ ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.