ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಟ್ಬೇಲ್ತೂರು ಗ್ರಾಮದ ದೇವಲ್ಮುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ಕೋಗಾರ್ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ರವಿವಾರ ರಾತ್ರಿ ಈ ಘಟನೆ ಸಂಭವಿಸಿದ್ದು ಸೋಮವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಮನೆಯಲ್ಲಿ ಇಬ್ಬರೇ ಇರುವುದರಿಂದ ಪ್ರಕರಣ ಬೆಳಕಿಗೆ ಬರುವುದು ತಡವಾಯಿತು.
ವೃತ್ತಿಯಲ್ಲಿ ಟಿಪ್ಪರ್ ಚಾಲಕನಾಗಿರುವ ರವಿ ಆಚಾರ್ಯ ಅವರಿಗೆ ಕಳೆದ ಹದಿನಾರು ವರ್ಷಗಳ ಹಿಂದೆ ಪೂರ್ಣೆಮಾ ಅವರನ್ನ ವಿವಾಹವಾಗಿದ್ದರು. ಬಗ್ದಾಡಿಯಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದ ರವಿ ಅಲ್ಲಯೇ ಬಾಡಿಗೆ ಮನೆ ಮಾಡಿ ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ನೆಲೆಸಿದ್ದ. ವಿಪರೀತ ಕುಡಿತದ ಚಟ ಹೊಂದಿರುವ ರವಿ ಕುಡಿದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿದ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿಯೇ ಉಳಿದಿದ್ದರು.
ಆ.21ರಂದು ಮರವಂತೆಯಲ್ಲಿ ಸಂಬಂಧಿಕರ ಸೀಮಂತ ಕಾರ್ಯಕ್ರಮಕ್ಕೆ ಬಂದಿದ್ದ ಪತ್ನಿ ಪೂರ್ಣಿಮಾ ಅವರನ್ನು ಪತಿ ರವಿ ಆಚಾರ್ಯ ಕರೆ ಮಾಡಿ ಮನೆಗೆ ಬರುವಂತೆ ಕೇಳಿಕೊಂಡಿದ್ದ. ಹೀಗಾಗಿ ಪೂರ್ಣಿಮಾ ಕಾರ್ಯಕ್ರಮ ಮುಗಿದ ಬಳಿಕ ಪತಿ ನೆಲೆಸಿದ್ದ ಬಾಡಿಗೆ ಮನೆಗೆ ತೆರಳಿರುವುದಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದರು. ರಾತ್ರಿ ಪತಿ ಪತ್ನಿ ಮಧ್ಯೆ ಜಗಳವಾಗಿ ಈ ದುರಂತ ನಡೆದಿರುವ ಸಾಧ್ಯತೆ ಇರಬಹುದೆಂದು ಸ್ಥಳೀಯರು ತಿಳಿಸಿದ್ದಾರೆ.
ಭಾನುವಾರ ರಾತ್ರಿಯಿಂದ ಸೊರಬದಲ್ಲಿ ನೆಲೆಸಿರುವ ಮಕ್ಕಳು ತಾಯಿಗೆ ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿರಲಿಲ್ಲ. ಹೀಗಾಗಿ ಅನುಮಾನಗೊಂಡ ಪೂರ್ಣಿಮಾ ಅವರ ತಾಯಿ ಹೆಮ್ಮಾಡಿಯಲ್ಲಿರುವ ತಮ್ಮ ಸಂಬಂಧಿಕರಿಗೆ ಕರೆ ಮಾಡಿ ಮನೆಗೆ ಹೋಗಿ ನೋಡಿ ಬರುವಂತೆ ತಿಳಿಸಿದ್ದರು. ಸಂಬಂಧಿಕರು ರಾತ್ರಿ ಹೋಗಿ ನೋಡಿದಾಗ ಲೈಟ್ ಆಫ್ ಇದ್ದ ಕಾರಣ ಮಲಗಿರಬಹುದು ಎಂದು ಅಂದಾಜಿಸಿ ವಾಪಾಸಾಗಿದ್ದರು. ಆದರೆ ಬೆಳಿಗ್ಗೆಯೂ ಕರೆ ಸ್ವೀಕರಿಸದ ಹಿನ್ನೆಲೆ ಮತ್ತೆ ಹೋಗಿ ನೋಡಿದಾಗ ಬಾಗಿಲು ಹಾಕಲ್ಪಟ್ಟದ್ದು ಅನುಮಾನಗೊಂಡು ಕಿಟಕಿಯಿಂದ ನೋಡಿದಾಗ ಪೂರ್ಣಿಮಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂತು.
ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಟಿ ಶ್ರೀಕಾಂತ್ ಕೆ, ಸಿಪಿಐ ಗೋಪಿಕೃಷ್ಣ, ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.